ಭಾರತೀಯ ಸಂಸ್ಕೃತಿಯನ್ನು ಗಟ್ಟಿಗೊಳಿಸಿದ ಶಂಕರಾಚಾರ್ಯರು- ಜಿ.ಬಿ.ಜ್ಯೋತಿಗಣೇಶ್
ತುಮಕೂರು(ಕ.ವಾ.)ಏ.೨೧: ವೇದ, ಉಪನಿಷತ್ತುಗಳ ಮೇಲಿನ ನಂಬಿಕೆ ಕುಸಿದು, ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ದಾರಿ ತಪ್ಪುವ ಸಂದರ್ಭದಲ್ಲಿ ತಮ್ಮ ಅದ್ವೆöÊತ ಸಿದ್ಧಾಂತ, ಕರ್ಮಯೋಗದ ಮೂಲಕ ಭಾರತೀಯತೆಯನ್ನು ಸರಿದಾರಿಗೆ ತಂದ ಯುಗ ಪ್ರವರ್ತಕ ಶ್ರೀ ಶಂಕರಾಚಾರ್ಯರು ಎಂದು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತುಮಕೂರು ಜಿಲ್ಲಾ ಬ್ರಾಹ್ಮಣ ಸಭಾ ಹಾಗೂ ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಮಂಗಳವಾರ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ “ಶ್ರೀ ಶಂಕರಾಚಾರ್ಯ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಂಕರಾಚಾರ್ಯರು ಭಾರತದ ಧಾರ್ಮಿಕ, ಸಾಮಾಜಿಕ, ಆಧ್ಯಾತ್ಮಿಕ, ಸಾಹಿತ್ಯಿಕ ಪರಂಪರೆಯನ್ನು ಸರಿದಾರಿಗೆ ತರಲು ತಮ್ಮ ಜೀವಿತದ ಅವಧಿಯಲ್ಲಿ ಜನಪರ ಆಲೋಚನೆ, ಆಚರಣೆಗಳ ಮೂಲಕ ಧರ್ಮ ಸಂರಕ್ಷಣೆಗೆ ಭದ್ರ ಬುನಾದಿ ಹಾಕಿದ್ದಾರೆ. ಧರ್ಮ ಸಂರಕ್ಷಣೆಗಾಗಿ ಇಡೀ ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಮಠಗಳನ್ನು ಸ್ಥಾಪಿಸಿ, ಅವುಗಳ ಮೂಲಕ ಧರ್ಮ ಜಾಗೃತಿಯಲ್ಲಿ ತೊಡಗಿದ್ದರು ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಶಂಕರಾಚಾರ್ಯರು ಅತ್ಯಂತ ಕಡಿಮೆ ವಯಸ್ಸಿನಲ್ಲಿಯೇ ಅಖಂಡ ಪಾಂಡಿತ್ಯದ ಮೂಲಕ ಜ್ಞಾನ ಸಾಧನೆ ಮಾಡಿದ್ದರು. ಶಂಕರಾಚಾರ್ಯರು ವೈದಿಕ ಪರಂಪರೆಗೆ ನೀಡಿದ ಕೊಡುಗೆ ಅಪಾರ. ಅವರ ಚಿಂತನೆಗಳು ಇಂದಿಗೂ ಪ್ರಸ್ತುತ. ಕಾಯಕದ ಅವಶ್ಯಕತೆಯನ್ನು ಒತ್ತಿ ಹೇಳಿದ ಶಂಕರರು, ಸಂಪಾದನೆ ಸರಿಯಾದ ಮಾರ್ಗದಲ್ಲಿ ಇರಬೇಕು ಎಂಬುದರ ಜೊತೆಗೆ, ನನ್ನ ಜನ್ಮ ಭೂಮಿಗಿಂತ ಮೀಗಿಲಾದುದ್ದು ಮತ್ತೊಂದಿಲ್ಲ ಎಂದು ಹೇಳುವ ರಾಷ್ಟçಪ್ರೇಮವನ್ನು ಜನರಲ್ಲಿ ಬಿತ್ತಿದರು ಎಂದರು.
ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಪರಮಾನಂದಜೀ ಮಹಾರಾಜ್ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ, ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಪೂರ್ವದಲ್ಲಿ ಶ್ರೀ ಶಂಕರ ಭಜನಾ ಮಂಡಳಿಯ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಹಾಗೂ ಶ್ರೀ ಶಂಕರಾಚಾರ್ಯರನ್ನು ಕುರಿತಂತೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ತುಮಕೂರು ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಬಿ. ನೀಲಮ್ಮ ಸೇರಿದಂತೆ ಜಿಲ್ಲಾ ಬ್ರಾಹ್ಮಣ ಸಭಾ ಮತ್ತು ಶ್ರೀ ಶಂಕರ ಸೇವಾ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
***************
ಕೆಡಿಪಿ ಸಭೆ ಏ.೨೫ಕ್ಕೆ ಮುಂದೂಡಿಕೆ
ತುಮಕೂರು(ಕ.ವಾ.)ಏ.೨೧: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ ೨೪ರಂದು ನಿಗಧಿಪಡಿಸಲಾಗಿದ್ದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಏಪ್ರಿಲ್ ೨೫ಕ್ಕೆ ಮುಂದೂಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ. ತಿಳಿಸಿದ್ದಾರೆ.
ಏಪ್ರಿಲ್ ೨೫ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
